Site icon PowerTV

ಕೆಲ ಸಚಿವರು, ಶಾಸಕರನ್ನು ‘ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ’ : ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು : ಕಾಂಗ್ರೆಸ್ ಘೋಷಿಸಿದ್ದ ಐದು ಉಚಿತ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಕಾಂಗ್ರೆಸ್ಸ್​ ಪಕ್ಷಕ್ಕೆ 135 ಸೀಟು ಕೊಟ್ಟ ಜನತೆಯ ‘ಗ್ಯಾರಂಟಿ ಬೇಡಿಕೆ’ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ ಸರ್ಕಾಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಛೇಡಿಸಿದ್ದಾರೆ.

ನಿತ್ಯ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ. ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ? ಎಂದು ಕಾಂಗ್ರೆಸ್ ನಾಯಕರಿಗೆ ಹೆಚ್​ಡಿಕೆ ಪ್ರಶ್ನೆ ಮಾಡಿದ್ದಾರೆ.

ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ?

ನನಗೂ ಫ್ರೀ.. ನಿನಗೂ ಫ್ರೀ.. ಸರ್ವರಿಗೂ ಫ್ರೀ.. ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ ಎಂದು ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ : ಸರ್ಕಾರ ಹೋಗುತ್ತೆ ಅಂತಾ ನಾನು ಹೇಳಿದ್ದೆನಾ? : ಹೆಚ್.ಡಿ ಕುಮಾರಸ್ವಾಮಿ

ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ

ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ ‘ಗ್ಯಾರಂಟಿ ಜಾಹೀರಾತು’ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ, ಸ್ವತಃ ಸಿಎಂ ಸಿದ್ದರಾಮಯ್ಯನವರೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರ್ಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.

ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ

ಅದು ಬಿಟ್ಟು ‘ಕೆಲ ಸಚಿವರು, ಶಾಸಕ’ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ ಎಂದು ಕುಮಾರಸ್ವಾಮಿ ಛೇಡಿಸಿದ್ದಾರೆ.

Exit mobile version