ಬೆಂಗಳೂರು : ಕಾಂಗ್ರೆಸ್ ಪಕ್ಷದ ಅನೇಕರು ನಾಯಕರು ಬಿಜೆಪಿ ಜತೆ ಶಾಮೀಲಾಗಿದ್ದಾರೆ. ಇದರಲ್ಲಿ ಮುಚ್ಚುಮರೆ ಏನಿದೆ?ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ದೇಶದಲ್ಲಿ ಬಿಜೆಪಿ ಜೊತೆ ಸೇರಿ ರಾಜಕೀಯ ಮಾಡದೆ ಇರುವ ಯವುದರೂ ಪಕ್ಷವನ್ನು ತೋರಿಸಿ. ಮೊದಲು ನನ್ನ ಪ್ರಶ್ನೆಗೆ ಉತ್ತರ ನೀಡಿ. ಆಮೇಲೆ ನಿಮ್ಮ ಪ್ರಶ್ನೆಗೆ ಉತ್ತರ ಕೊಡುತ್ತೇನೆ ಎಂದು ತಿಳಿಸಿದ್ದಾರೆ.
ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಜೊತೆ ಶಾಮೀಲಾಗಿದ್ದಾರೆ. ಕಾಂಗ್ರೆಸ್ ನ ಅನೇಕ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿ ಜೊತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ? ಕರ್ನಾಟಕದಲ್ಲಿಯೂ ಅದನ್ನು ಕಾಣಬಹುದು. ಇದರಲ್ಲಿ ಮುಚ್ಚುಮರೆ ಏನಿದೆ? ಎಂದು ಪ್ರಶ್ನಿಸಿದ್ದಾರೆ.

ನಾನೂ ಕೆಲಸ ಮಾಡಲು ಸಿದ್ದನಿದ್ದೇನೆ
ನಾವು ಕುಳಿತುಕೊಂಡಿರಲ್ಲ. ನಾನು ಕೂಡ ಕೆಲಸ ಮಾಡಲು ಸಿದ್ದನಿದ್ದೇನೆ. ಪಕ್ಷದ ಯುವಕರು ತುಂಬಾ ಉತ್ಸಾಹದಲ್ಲಿದ್ದಾರೆ. ಪಕ್ಷದಲ್ಲಿ ಸೋತವರು, ಗೆದ್ದವರು ನಾವ್ಯಾರು ನಿರಾಸೆ ಆಗಿಲ್ಲ. ಎಲ್ಲೆಲ್ಲಿ ನಿಲ್ಲಬೇಕು ಅಂತಾ ಮಾತಾಡ್ತೀವಿ. ಸೆಕ್ಯುಲರ್ ಪಾರ್ಟಿಗೆ ಬೆಂಬಲ ಕೊಡಬೇಕು ಅಂತಾ ಎರಡು ಬಾರಿ ನಾವು ಕಾಂಗ್ರೆಸ್ ಗೆ ಬೆಂಬಲ ಕೊಟ್ಟಿದ್ವಿ ಎಂದು ದೇವೇಗೌಡರು ಹೇಳಿದ್ದಾರೆ.
ಇದನ್ನೂ ಓದಿ : ಜುಲೈ 7ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು : ಸಿದ್ದರಾಮಯ್ಯ
ಬಿಜೆಪಿ, ಕಾಂಗ್ರೆಸ್ ಬಗ್ಗೆ ನಾನು ಮಾತಾಡಲ್ಲ
ಮುಂದೆ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ. ಪ್ರತೀ ಹಳ್ಳಿಗೂ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕು. ಬಿಜೆಪಿ, ಕಾಂಗ್ರೆಸ್ ಬಗ್ಗೆ ನಾನು ಮಾತಾಡಲ್ಲ. ಅವ್ರು ಏನು ಭರವಸೆ ಕೊಟ್ಟಿದ್ರು ಅಂತಾ ಮಾತಾಡಲ್ಲ. ಬಿಬಿಎಂಪಿ ಎಲೆಕ್ಷನ್ ಎದುರಿಸಲು ನಾವು ಸಿದ್ದರಿದ್ದೇವಿ ಎನ್ನುವ ಮೂಲಕ ಇಳಿವಯಸ್ಸಿನಲ್ಲಿಯೂ ನಾನು ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ಜನ ನಮಗೆ ಶಕ್ತಿ ಕೊಟ್ಟಿದ್ದಾರೆ
ಗ್ರಾಮೀಣ ಪ್ರದೇಶಗಳಲ್ಲಿ ಜನ ನಮಗೆ ಶಕ್ತಿ ಕೊಟ್ಟಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡ್ತಿದ್ದೇವೆ. ಚುನಾವಣೆಗೆ ಹೋಗೋದಕ್ಕೂ ಮನ್ನ ಪ್ರಣಾಳಿಕೆ ತಯಾರಿ ಮಾಡ್ತಿದ್ದೇವೆ. ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡಬಾರದು. ಕೂಲಂಕುಶವಾಗಿ ಚರ್ಚೆ ಮಾಡಿ, ಸಮಗ್ರವಾದ ಪ್ರಣಾಳಿಕೆ ತಯಾರಿ ಮಾಡ್ತೇವೆ ಎಂದು ದೇವೇಗೌಡರು ತಮ್ಮ ಚುನವಣಾ ಸಮರಾಭ್ಯಾಸದ ಬಗ್ಗೆ ಮಾಹಿತಿ ನೀಡಿದ್ದಾರೆ.


