Site icon PowerTV

ನಟ ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಸ್ಯಾಂಡಲ್​ವುಡ್ ರಿಯಲ್ ಸ್ಟಾರ್ ನಟ, ನಿರ್ದೇಶಕ ಉಪೇಂದ್ರ ಅವರ ವಿರುದ್ಧ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸ್​ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

ಪ್ರಜಾಕೀಯ ದಿನ ಅಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಲೈವ್​ನಲ್ಲಿ ಮಾತನಾಡುವಾಗ ಉಪೇಂದ್ರ ಅವರು ಆಕ್ಷೇಪಾರ್ಹ ಪದ ಬಳಸಿದ್ದರು. ಈ ಕುರಿತು ಆಕ್ಷೇಪಾರ್ಹ ಕೇಳಿಬಂದ ಕೂಡಲೇ ನಟ ಉಪೇಂದ್ರ ಲೈವ್ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ. ಅಲ್ಲದೆ, ಕ್ಷಮೆ ಕೇಳಿದ್ದಾರೆ.

ಆದರೂ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರೊಬ್ಬರು ಈ ಸಂಬಂಧ ಉಪೇಂದ್ರ ವಿರುದ್ಧ ದೂರು ನೀಡಿದ್ದಾರೆ. ಎಫ್​ಐಆರ್ ದಾಖಲಿಸಿಕೊಂಡಿರುವ ಸಿ.ಕೆ ಅಚ್ಚುಕಟ್ಟು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉಪೇಂದ್ರ ವಿರುದ್ಧ ಪ್ರತಿಭಟನೆ

ರಾಮನಗರಲ್ಲಿ ಉಪೇಂದ್ರ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ಹಾರೋಹಳ್ಳಿ ವೃತ್ತದಲ್ಲಿ ದಲಿತ ಪರ ಸಂಘಟನೆಗಳ ಮುಖಂಡರು ಉಪೇಂದ್ರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ. ಉಪೇಂದ್ರ ಹೇಳಿಕೆ ಖಂಡಿಸಿ ಸಮತಾ ಸೈನಿಕ ದಳ ಮತ್ತು ದಲಿತ ಪರ ಒಕ್ಕೂಟಗಳು ಆಕ್ರೋಶ ಹೊರಹಾಕಿದೆ.

ಕ್ಷಮೆ ಕೇಳಿದ ಉಪೇಂದ್ರ

ವಿವಾದಾತ್ಮಕ ಹೇಳಿಕೆ ಕುರಿತು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಉಪೇಂದ್ರ, ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಒಂದು ಗಾದೆ ಮಾತನ್ನು ಬಳಸಿದ್ದು. ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಆ ಲೈವ್ ವಿಡಿಯೋವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿರುತ್ತೇನೆ. ಮತ್ತು ಈ ಮಾತಿಗೆ ಕ್ಷಮೆಯಿರಲಿ ಎಂದು ಬರೆದುಕೊಂಡಿದ್ದಾರೆ.

Exit mobile version