Site icon PowerTV

ನಮ್ಮದು ಪ್ರಪಂಚದಲ್ಲೇ ಮಾದರಿ ಸರ್ಕಾರ : ಕೃಷ್ಣ ಭೈರೇಗೌಡ

ಚಾಮರಾಜನಗರ : ನಮ್ಮ ಸರ್ಕಾರ ದೇಶದಲ್ಲಲ್ಲ ಇಡೀ ಪ್ರಪಂಚದಲ್ಲೇ ಮಾದರಿ ಸರ್ಕಾರ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಚಾಮರಾಜನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪ್ರಪಂಚದಲ್ಲೇ ಯಾವುದೇ ಸರ್ಕಾರಗಳು ನೀಡದ 5 ಗ್ಯಾರಂಟಿ ಯೋಜನೆಯನ್ನು ನಾವು ನೀಡಿದ್ದೇವೆ. ಎಲ್ಲವೂ ಕೂಡ ಸಾಮಾನ್ಯ ಜನರಿಗೆ, ನೈಜ ಫಲಾನುಭವಿಗಳಿಗೆ ತಲುಪುವ ಯೋಜನೆಗಳು, ನಾವು ಅಂಬಾನಿ ಹಾಗೂ ಅದಾನಿಗೆ ಕೊಡುತ್ತಿಲ್ಲ, ತಿಮ್ಮಣ್ಣ ಹಾಗೂ ಬೊಮ್ಮಣ್ಣಗೆ ಕೊಡುತ್ತಿದ್ದೇವೆ ಎಂದರು.

ನಮ್ಮದು ಪರ್ಸೇಂಟೇಜ್ ಇಲ್ಲದ ಯೋಜನೆಗಳು, ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಲಿದೆ. ಒಂದು ಕುಟುಂಬಕ್ಕೆ ಏನಿಲ್ಲವೆಂದರೂ ತಿಂಗಳಿಗೆ 4 ರಿಂದ 5 ಸಾವಿರ ರೂ. ಹಣ ಜಮೆಯಾಗುತ್ತಿದೆ. ನೊಬೆಲ್ ಪ್ರಶಸ್ತಿ ಪುರಸ್ಕೃತರು ನಮ್ಮ ಸರ್ಕಾರದ ಯೋಜನೆಗಳನ್ನು ಅಧ್ಯಯನ ಮಾಡಲು ಬರುತ್ತಿದ್ದಾರೆ ಎಂದು ತಿಳಿಸಿದರು.

ಇಂಡಿಯಾ ಒಕ್ಕೂಟಕ್ಕೆ ಒಲವು

ಕರ್ನಾಟಕದಲ್ಲಿ ಕಾಂಗ್ರೆಸ್ ನ ಅಭೂತಪೂರ್ವ ಯಶಸ್ಸು ಇಡೀ ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬರುವ ಎಲ್ಲಾ ಸಾಧ್ಯತೆ ಇದ್ದು ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪರ ಜನರ ನಿಲುವು ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ನಮ್ಮ ಯೋಜನೆಗಳು ಜನರ ಬಳಿ ಹೋಗಿವೆ. ಆದರೆ, ಕೊಟ್ಟದ್ದು ಕಾಂಗ್ರೆಸ್ ಎಂಬುದು ಜನರಿಗೆ ತಿಳಿಯಬೇಕು. ಲೋಕಸಭಾ ಚುನಾವಣೆಯಲ್ಲಿ ನಾವು ಉತ್ತಮ ಫಲಿತಾಂಶ ಪಡೆಯಲು ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಸಿ‌.ಪುಟ್ಟರಂಗಶೆಟ್ಟಿ, ಎ.ಆರ್‌.ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಇದ್ದರು.

Exit mobile version