Site icon PowerTV

ಮೂವರು ನಾಯಕರಿಗೆ ಬಿಜೆಪಿ ಹೈಕಮಾಂಡ್ ಬುಲಾವ್

ಬೆಂಗಳೂರು : ಕರ್ನಾಟಕದಲ್ಲಿ ಪ್ರತಿಪಕ್ಷ ನಾಯಕನ ನೇಮಕವಾಗಿಲ್ಲದಿರುವುದು ಮತ್ತು ರಾಜ್ಯ ಬಿಜೆಪಿ ನಾಯಕರನ್ನು ದೆಹಲಿ ನಾಯಕರು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪಗಳ ಮಧ್ಯೆಯೇ ಇದೀಗ ಮೂವರು ನಾಯಕರನ್ನು ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ.

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಎಂಎಲ್​ಸಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ಪಿ.ಸಿ ಮೋಹನ್‌ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ಬುಲಾವ್ ಬಂದಿದೆ. ಇದರಂತೆ ಈ ಮೂವರು ನಾಯಕರು ಗುರುವಾರವೇ ದೆಹಲಿಗೆ ತೆರಳಬೇಕಿದೆ.

ಇಂದು ಮಧ್ಯಾಹ್ನ 3.30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಮೂವರೂ ನಾಯಕರಿಗೆ ಸೂಚನೆ ನೀಡಲಾಗಿದೆ. ಈ ಮಧ್ಯೆ, ಹೈಕಮಾಂಡ್​​ನಿಂದ ಕರೆ ಬಂದಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ದೆಹಲಿಗೆ ಹೋಗುತ್ತಿದ್ದೇನೆ. ನನ್ನ ಜೊತೆಗೆ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಪಿ.ಸಿ. ಮೋಹನ್ ಅವರಿಗೂ ಬರಲು ಹೇಳಿದ್ದಾರೆ. ಯಾಕೆ ಕರೆದಿದ್ದಾರೆ ಗೊತ್ತಿಲ್ಲ. ಅಲ್ಲಿಗೆ ಹೋದ ಮೇಲೆ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

Exit mobile version