Site icon PowerTV

ಏಡ್ಸ್ ನಿಯಂತ್ರಣ ಕಾಯ್ದೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ : ಸಿದ್ದರಾಮಯ್ಯ

ಬೆಂಗಳೂರು : 2017ರಲ್ಲಿ ಏಡ್ಸ್ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವಿಶ್ವ ಏಡ್ಸ್ ದಿನ ಮತ್ತು 25ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯಗಳು ಮುನ್ನಡೆಸಲಿ ಎಂಬ ಧ್ಯೇಯವಾಕ್ಯದೊಂದಿಗೆ ಈ ವರ್ಷದ ಏಡ್ಸ್ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಾಂಕ್ರಾಮಿಕ ರೋಗ ಪೂರ್ಣ ವಾಸಿಯಾದರೆ ಏಡ್ಸ್ ಪೀಡಿತರು ನೆಮ್ಮದಿಯ ಜೀವನ ನಡೆಸಲು ಸಾಧ್ಯ. ಇನ್ನು ಐದಾರು ವರ್ಷಗಳಲ್ಲಿ ಸೊನ್ನೆಯ ದಿನ ಬರಲಿ ಎಂದು ಹಾರೈಸುತ್ತೇನೆ. ಭಾರತ ಏಡ್ಸ್ ಪ್ರಕರಣಗಳಲ್ಲಿ ವಿಶ್ವದಲ್ಲಿಯೇ 3ನೇ ಸ್ಥಾನದಲ್ಲಿದೆ. ನಾವು ಹೆಚ್ಚು ಜಾಗೃತರಾಗುವುದು ಅವಶ್ಯಕ. ರೋಗಿಗಳೊಂದಿಗೆ ಮಾತನಾಡಿದರೆ ರೋಗ ಬರುತ್ತದೆ ಎಂದು ಕೆಲವರಿಗೆ ತಪ್ಪು ತಿಳುವಳಿಕೆಗಳಿವೆ. ಆದರೆ ಹಾಗಾಗುವುದಿಲ್ಲ. ಹೆಚ್ಚಾಗಿ ರಕ್ತದ ಮೂಲಕವಾಗಿ ಹರಡುತ್ತದೆ. ಇದು ಜನರಿಗೆ ಗೊತ್ತಿರಬೇಕು ಎಂದು ತಿಳಿಸಿದರು.

ಏಡ್ಸ್​ಗೆ ಇನ್ನೂ ಔಷಧಿ ಕಂಡುಹಿಡಿದಿಲ್ಲ

ರೋಗಕ್ಕೆ ತುತ್ತಾಗಿ ಅನುಭವಿಸುವುದಕ್ಕಿಂತ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾಮೂಹಿಕವಾಗಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು. ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗೋಲ್ಲ. ಆದರೆ, ಇದು ವಾಸಿಯಾಗದ ರೋಗ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್ ರೋಗಕ್ಕೆ ಮಾತ್ರ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Exit mobile version