Site icon PowerTV

‘ಅರ್ಜುನ’ನ ಸಾವಿಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ ಎಂದು ಹೇಳಿದ್ದಾರೆ.

ಅರ್ಜುನ ಆನೆಯು ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಎಂಟು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟಿದ್ದ. ಜನರ ಪ್ರೀತಿಪಾತ್ರವಾಗಿದ್ದ ಆನೆ ‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಚಾಮುಂಡೇಶ್ವರಿ ಸೇವೆಗೈದಿದ್ದ ಅರ್ಜುನ

ಬರೋಬ್ಬರಿ 750 ಕಿಲೋ ತೂಕದ ಚಿನ್ನದ ಅಂಬಾರಿ ಹೊತ್ತು, ಅತ್ಯಂತ ಸಂಯಮದಿಂದ ಮೆರವಣಿಗೆಯಲ್ಲಿ ಸಾಗುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಅರ್ಜುನ ಕಾಡಾನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದೆ ಎಂದು ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿದ್ದಾರೆ.

Exit mobile version