Site icon PowerTV

ಈ ವಾರವೇ ರೈತರ ಖಾತೆಗೆ 2,000, ಚಳ್ಳಕೆರೆ ತಾಲೂಕಿನಿಂದ ಚಾಲನೆ : ಸಿದ್ದರಾಮಯ್ಯ

ಬೆಂಗಳೂರು : ಈ ವಾರವೇ ರೈತರ ಖಾತೆಗೆ ಬೆಳೆನಷ್ಟ ಪರಿಹಾರಧನ (ಬರ ಪರಿಹಾರದ ಹಣ) ವರ್ಗಾವಣೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳ ಅಧಿಕೃತ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಅವರು, ಮೊದಲ ಕಂತಿನ 2,000 ರೂ. ಬೆಳೆನಷ್ಟ ಪರಿಹಾರಧನವನ್ನು ಈ ವಾರವೇ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಿಂದ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಈಗಾಗಲೇ ಘೋಷಣೆ ಮಾಡಿದ್ದು, ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ಸಾಗಿದೆ. ಮಳೆ ಕೊರತೆಯಿಂದಾಗಿ ಈ ಬಾರಿ ಒಟ್ಟು 48 ಲಕ್ಷ ಹೆಕ್ಟೇರ್‌ ಬೆಳೆ ನಷ್ಟವಾಗಿದೆ. ಇದರಿಂದಾಗಿ ಲಕ್ಷಾಂತರ ರೈತರು ಆರ್ಥಿಕ ಸಮಸ್ಯೆಗೆ ತುತ್ತಾಗಿದ್ದಾರೆ. ಕೇಂದ್ರದ ನೆರವಿಗೆ ಕಾಯುತ್ತಾ ಕೂರದೆ ರೈತರ ಕಷ್ಟಕ್ಕೆ ತಕ್ಷಣ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಕೃಷಿ ಸಾಲ ಮರುಪಾವತಿ ಅವಧಿ ವಿಸ್ತರಣೆ

ಪ್ರಸಕ್ತ ಸಾಲಿನಲ್ಲಿ ರಾಜ್ಯದ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಬೆಳೆದ ಬೆಳೆ ಕೈಸೇರದೆ ನಾಡಿನ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ವೇಳೆಯಲ್ಲಿ ರೈತರಿಗೆ ನೆರವಾಗುವ ದೃಷ್ಟಿಯಿಂದ ಕೃಷಿ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಲು ನಾವು ಕ್ರಮ ವಹಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Exit mobile version