Site icon PowerTV

ಸರ್ಕಾರಿ ಶಾಲೆಗಳಲ್ಲಿ ಸ್ವಚ್ಛತಾ ಸಿಬ್ಬಂದಿ ನೇಮಿಸಿ; ಸಿಎಂಗೆ ಮನವಿ

ಬೆಂಗಳೂರು: ಬಿಸಿಯೂಟ ಸಿಬ್ಬಂದಿ ಮಾದರಿಯಲ್ಲಿ ಸರ್ಕಾರಿ ಶಾಲೆಗಳ ಸ್ವಚ್ಛತೆಗಾಗಿ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ. 

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ನೇತೃತ್ವದಲ್ಲಿ ಪದಾಧಿಕಾರಿಗಳು ಇಂದು ಮನವಿ ಸಲ್ಲಿಸಿದ್ದಾರೆ.

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಗಾಗಿ ಮಕ್ಕಳನ್ನು ಬಳಸುತ್ತಿದ್ದಾರೆ ಎಂಬ ಪ್ರಕರಣಗಳು ಬೆಳಕಿಗೆ ಬಂದು ಸಾಕಷ್ಟು ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಈ ಕಾರಣಕ್ಕಾಗಿ ಮುಖ್ಯ ಶಿಕ್ಷಕರನ್ನು ಅಮಾನತು ಮಾಡುವುದು ಹಾಗೂ ಪೊಲೀಸ್ ಕೇಸ್ ದಾಖಲಿಸುತ್ತಿರುವ ಘಟನೆಗಳು ಶಿಕ್ಷಕರನ್ನು ಬೆಚ್ಚಿಬಿಳಿಸುತ್ತಿವೆ.

ಇದನ್ನೂ ಓದಿ: ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನೋ ಎಂಟ್ರಿ

ಈ ವಿಷಯದಲ್ಲಿ ಶಿಕ್ಷಕರ ಮೇಲೆ ಆಗುತ್ತಿರುವ ಈ ಕೃತ್ಯವನ್ನು ರಾಜ್ಯದ ಶಿಕ್ಷಕರ ಸಂಘಟನೆ ಅತ್ಯಂತ ಗಂಭೀರವಾಗಿ ವಿರೋಧಿಸುತ್ತಿದೆ ಹಾಗೂ ಶಾಲೆಗಳ ಸ್ವಚ್ಛತೆಯನ್ನು ಯಾರು ಮಾಡಬೇಕೆಂಬುದೇ ಅತ್ಯಂತ ಗಂಭೀರವಾಗಿ ಯೋಚಿಸಬೇಕಾಗಿದೆ.

ಅದರಲ್ಲೂ ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿರುವ ತಾವು, ರಾಜ್ಯದ ಸರ್ಕಾರಿ ಶಾಲೆಗಳ ಸ್ವಚ್ಛತೆಗಾಗಿ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಕೋರಿದ್ದಾರೆ.

ಮನವಿಯಲ್ಲಿರುವ ಅಂಶಗಳು 

  1. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಗ್ರಾಮ ಪಂಚಾಯಿತಿಯಿಂದ ಸರ್ಕಾರಿ ಶಾಲೆಗಳ ಸ್ವಚ್ಛತೆಗಾಗಿ ವ್ಯವಸ್ಥೆ ಮಾಡಬೇಕು ಅಥವಾ ಹೊರ ಗುತ್ತಿಗೆ ಆಧಾರದ ಮೇಲೆ ಸ್ವಚ್ಛತೆಗಾಗಿ ಸಿಬ್ಬಂದಿಯನ್ನು ಬಿಸಿಯೂಟದ ಸಿಬ್ಬಂದಿ ಮಾದರಿಯಲ್ಲಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಬೇಕು.
  2. ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಹಾಗೂ ಸಂಬಂಧಿಸಿದ ಇಲಾಖೆಗಳ ವ್ಯಾಪ್ತಿಗೆ ಬರುವ ಸ್ವಚ್ಛತಾ ಸಿಬ್ಬಂದಿಯಿಂದ ಶಾಲಾ ಸ್ವಚ್ಛತೆಯನ್ನು ನೆರವೇರಿಸಲು ವ್ಯವಸ್ಥೆ ಮಾಡಬೇಕು.
  3. ಶಾಲಾ ಸುರಕ್ಷತೆ, ಶೌಚಾಲಯ ಸ್ವಚ್ಛತೆ ಹಾಗೂ ಶಾಲಾ ಸ್ವಚ್ಛತೆಯ ಕುರಿತು ಸ್ಪಷ್ಟ ಮಾರ್ಗದರ್ಶನ ನೀಡುವ ಬಗ್ಗೆ ಸ್ಪಷ್ಟ ಸುತ್ತೋಲೆ ಹೊರಡಿಸಬೇಕು.
  4. ಶೌಚಾಲಯ ಹಾಗೂ ಕುಡಿಯುವ ನೀರಿನ ಸ್ವಚ್ಛತೆಗಾಗಿ ಅನುದಾನ ಹೆಚ್ಚಿಸುವುದಕ್ಕಿಂತ ಅಗತ್ಯ ಸಿಬ್ಬಂದಿಗಳನ್ನು ಒದಗಿಸಬೇಕು.
  5. ಶಾಲೆಗಳ ಸ್ವಚ್ಛತೆಯ ದೃಷ್ಟಿಕೋನದಿಂದ ಶಾಲೆಯ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರ ಮೇಲೆ ಆಗುತ್ತಿರುವ ಅಮಾನತು ಪ್ರಕರಣಗಳನ್ನು ಹಿಂಪಡೆಯಬೇಕು, ಇದಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಕೇಸ್‌ಗಳನ್ನು ದಾಖಲಿಸಿದಂತೆ ನೋಡಿಕೊಳ್ಳುವುದು
  6. ಶಿಕ್ಷಕರ/ನೌಕರರ ಇನ್ನಿತರ ಬೇಡಿಕೆಗಳಾದ ರಾಜ್ಯದ ನೌಕರರಿಗೆ 7ನೇ ವೇತನ ಆಯೋಗದ ವರದಿ ಪಡೆದು ಸೌಲಭ್ಯಗಳನ್ನು ತಕ್ಷಣ ಜಾರಿಗೊಳಿಸಬೇಕು ಹಾಗೂ ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸಬೇಕು.
Exit mobile version