ಬೆಂಗಳೂರು : ದೇಶದ ಪ್ರಧಾನಿಯಾಗಿ ಮಕ್ಕಳ ಭವಿಷ್ಯದ ಜತೆಗೆ ಚೆಲ್ಲಾಟ ಆಡೋದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣೆಗಾಗಿ ಹಮ್ಮಿಕೊಂಡಿರುವ ರೋಡ್ ಶೋದಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಹೀಗಾಗಿ, ಪ್ರಧಾನಿ ಮೋದಿ ರೋಡ್ ಶೋ ವೇಳಾಪಟ್ಟಿಯನ್ನು ಬದಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿಗೆ ಕಿಂಚಿತ್ ಕಾಳಜಿ ಇದ್ಯಾ?
ಸಾರ್ವಜನಿಕ ವಲಯದಲ್ಲಿ ಇದು ಸರಿನಾ, ತಪ್ಪಾ ಚರ್ಚೆ ನಡೆದರೂ ಅದನ್ನು ಬಿಜೆಪಿಯವರು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಮೋದಿ ಅವರು ನೀಟ್ ಪರೀಕ್ಷೆಗೆ ತೊಂದರೆ ಕೊಡಬಾರದು. ಮಕ್ಕಳ ಭವಿಷ್ಯದ ಬಗ್ಗೆ ಅವರಿಗೆ ಏನಾದರೂ ಕಿಂಚಿತ್ ಕಾಳಜಿ ಇದ್ದರೆ ರೋಡ್ ಶೋ ಮುಂದಕ್ಕೆ ಹಾಕುವುದು ಒಳ್ಳೆಯದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ : ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ : ಸಾರ್ವಜನಿಕರೇ ಈ ರಸ್ತೆಗಳತ್ತ ಹೊಗಲೇ ಬೇಡಿ
ಮಕ್ಕಳ ಭವಿಷ್ಯಕ್ಕೆ ಧಕ್ಕೆ ಆಗಬಾರದು
ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ಆಯೋಜಿಸಲಾಗಿದೆ. ಈ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿದೆ. ಇದರ ಬಗ್ಗೆ ನನಗೂ ಮಾಹಿತಿ ಇದೆ. ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂದು ತಿಳಿಸಿದ್ದಾರೆ.
ಅಧಿಕಾರ ಹಿಡಿಯುವ ಅಜೆಂಡಾ
ಬಿಜೆಪಿ ಪಕ್ಷಕ್ಕೆ ನಾಡಿನ ಜನರ ಸಮಸ್ಯೆಗಳಿಗಿಂತ ಅವರಿಗೆ ಅಧಿಕಾರ ಹಿಡಿಯೋದೆ ಮುಖ್ಯವಾಗಿದೆ. ಅಧಿಕಾರಕ್ಕೋಸ್ಕರ ಅವರು ಏನು ಬೇಕಾದರೂ ಮಾಡುತ್ತಾರೆ. ಜನಸಾಮಾನ್ಯರ ಬದುಕಿನ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ. ಏನಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.


