Thursday, August 28, 2025
HomeUncategorizedಕರಾವಳಿ ಈಗ ಕೊಲೆಗಳ ಆಡಂಬೋಲವಾಗಿದೆ : ಹೆಚ್​ಡಿಕೆ

ಕರಾವಳಿ ಈಗ ಕೊಲೆಗಳ ಆಡಂಬೋಲವಾಗಿದೆ : ಹೆಚ್​ಡಿಕೆ

ಬೆಂಗಳೂರು : ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಕೊಲೆಗಳ ಆಡಂಬೋಲವಾಗಿದೆ. 10 ದಿನಗಳಲ್ಲಿ 3 ಕೊಲೆ! ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಇದೇ ಸಾಕ್ಷಿ.

ಮುಖ್ಯಮಂತ್ರಿ ಅವರು ಮಂಗಳೂರಿನಲ್ಲಿ ಇದ್ದಾಗಲೇ 3ನೇ ಕೊಲೆ ಆಗಿದೆ. ಅಷ್ಟರಲ್ಲಿ ಸಿಎಂ ಸಾಹೇಬರು ಜಿಲ್ಲೆಯಿಂದ ಕಾಲ್ಕಿತ್ತಿದ್ದಾರೆ. ಅಲ್ಲೇ ಉಳಿದು ಪರಿಸ್ಥಿತಿ ಅವಲೋಕಿಸಿ, ಕೊಲೆಗೆಡುಕರನ್ನು ಹಡೆಮುರಿ ಕಟ್ಟುವಂತೆ ಕಟ್ಟಾಜ್ಞೆ ಮಾಡುವ ಧೈರ್ಯವನ್ನು ತೋರಲಿಲ್ಲ. ಅವರ ಅಧೈರ್ಯಕ್ಕೆ ಕಾರಣವೇನು? ಕಾಣದ ಕೈಗಳ ಒತ್ತಡವೇನಾದರೂ ಉಂಟಾ?

ಕರಾವಳಿ ಶಿಕ್ಷಣದ ಕಾಶಿ, ದೇಗುಲಗಳ ಪುಣ್ಯನೆಲ, ಪ್ರಾಕೃತಿಕ ಸೌಂದರ್ಯದ ಬೀಡು, ಪ್ರವಾಸೋದ್ಯಮದಲ್ಲಿ ಕರ್ನಾಟಕದ ಕೀರ್ತಿಕಳಸ. ಇಂಥ ನೆಲದಲ್ಲಿ ದಿನಕ್ಕೊಂದು ಕೊಲೆ!! ಈ ಕೊಲೆಗಳನ್ನು ಹತ್ತಿಕ್ಕುವ ಬದಲು ಬೊಮ್ಮಾಯಿ ಅವರು ʼಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಿದ್ದಾರೆ. ಕರಾವಳಿ & ಕರ್ನಾಟಕವನ್ನು ʼಜಂಗಲ್ ರಾಜ್ʼ ಮಾಡುವ ಹುನ್ನಾರವಷ್ಟೇ ಇದು ಎಂದು ವ್ಯಂಗ್ಯವಾಡಿದರು.

ಮನೆ, ಮನಗಳಲ್ಲಿ ಮಾತ್ರ ಇರಬೇಕಿದ್ದ ಧರ್ಮವನ್ನು ʼವ್ಯಸನʼವನ್ನಾಗಿಸಿ ಕೈಗೆ ದೊಣ್ಣೆ, ಶೂಲ ಕೊಟ್ಟು ಯುವಕರ ನಿಷ್ಕಲ್ಮಶ ಮುಗ್ಧಮನಸ್ಸಿಗೆ ʼಕೊಮುಪ್ರಾಷನʼ ಮಾಡಿದ ದುಷ್ಪರಿಣಾಮವೇ ಸರಣಿ ಕೊಲೆಗಳು. ಧರ್ಮನಿರಪೇಕ್ಷತೆ ತತ್ತ್ವವನ್ನು ನಿರ್ನಾಮ ಮಾಡಿದ್ದೇ ಇದಕ್ಕೆಲ್ಲ ಮೂಲ ಕಾರಣ ಎಂದರು.

ಮಸೂದ್, ಪ್ರವೀಣ್ ನೆಟ್ಟಾರು; ಈಗ ಫಾಸಿಲ್. ಇನ್ನೆಷ್ಟು ಕೊಲೆಗಳು ನಡೆದರೆ ಸರಕಾರಕ್ಕೆ ತೃಪ್ತಿ? ಸರಣಿ ಕೊಲೆಗಳಿಂದ ಕರಾವಳಿಗೆ ಮಾತ್ರವಲ್ಲ, ಕರ್ನಾಟಕದ ಪ್ರತಿಷ್ಠೆಗೆ ಪೆಟ್ಟು ಬಿದ್ದಿದೆ. ಈ ಅರಾಜಕತೆಯಿಂದ ಇಡೀ ಕರಾವಳಿಯ ಆರ್ಥಿಕತೆಯೇ ಬುಡಮೇಲಾಗುತ್ತಿದೆ. ಆದರೆ, ಸರಕಾರ ಸಾವಿನಲ್ಲೂ ʼಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ.

ಕೊಲೆಗಳ ಹಿಂದಿನ ಕಾರಣ ಬೇಧಿಸಿ ಕೊಲೆಗೆಡುಕರನ್ನು ಹತ್ತಿಕ್ಕುವ ಕೆಲಸ ಮಾಡಬೇಕಿದ್ದ ಸರಕಾರ, ಪ್ರತೀ ಕೊಲೆಗೂ ತಾನೇ ಮುಂದೆ ನಿಂತು ಹೊಸಹೊಸ ಟ್ವಿಸ್ಟ್ ನೀಡುತ್ತಿದೆ. ಸರಕಾರದ ಕೆಲಸ ಬಿಗಿ ಆಡಳಿತ ನಡೆಸುವುದೇ ಹೊರತು ಬೀದಿಯಲ್ಲಿ ನಿಂತು ಗಂಟಲು ಹರಿದುಕೊಳ್ಳುವುದಲ್ಲ ಎಂದು ಹೇಳಿದರು.

ಕರಾವಳಿಯಲ್ಲಿ ನೆಮ್ಮದಿ ನೆಲಸಬೇಕಾದರೆ, ಪೊಲೀಸ್ ವ್ಯವಸ್ಥೆಗೆ ಶಕ್ತಿ ತುಂಬಬೇಕು. ಕಾಣದ ಕೈಗಳ ಸಂಕೋಲೆಯಿಂದ ಇಲಾಖೆಯನ್ನು ಮುಕ್ತಗೊಳಿಸಿ ಅಧಿಕಾರಿಗಳು ಸ್ವತಂತ್ರವಾಗಿ ಕರ್ತವ್ಯ ನಿರ್ವಹಿಸುವ ವಾತಾವರಣ ನಿರ್ಮಿಸಬೇಕು. ಇಲ್ಲವಾದರೆ, ಡಬಲ್ ಎಂಜಿನ್ ಸರಕಾರಕ್ಕೆ ಜನರೇ ಬೆಂಕಿ ಹಾಕಿಯಾರು ಎಂದರು.

RELATED ARTICLES
- Advertisment -
Google search engine

Most Popular

Recent Comments